Published on: March 6, 2023

‘ಶ್ರಮಿಕ್ ನಿವಾಸ್’ ಯೋಜನೆ

‘ಶ್ರಮಿಕ್ ನಿವಾಸ್’ ಯೋಜನೆ


ಸುದ್ದಿಯಲ್ಲಿ ಏಕಿದೆ?ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ  ರಾಜ್ಯಾದ್ಯಂತ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಸತಿ ಸಮುಚ್ಚಯಗಳನ್ನು ನಿರ್ಮಾಣ ಮಾಡಿ, ನೆರವಿಗೆ ಮುಂದಾಗಿದೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕಾರ್ಮಿಕ ಇಲಾಖೆಯಿಂದ ಶ್ರಮಿಕರಿಗೆ ಶ್ರಮಿಕ ನಿವಾಸ್ ವಸತಿ ಯೋಜನೆ ಜಾರಿಗೆ ಬರುತ್ತಿದೆ.


ಮುಖ್ಯಾಂಶಗಳು

  • ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಮನೆಗಳನ್ನು ನಿರ್ಮಿಸಲಾಗುವುದು.
  • ಮಂಡಳಿಯ ಗುರುತಿನ ಚೀಟಿ ಹೊಂದಿರುವವರು ಈ ಸೇವೆಯನ್ನು ಪಡೆಯಬಹುದು. ಇದರಿಂದ ಕೂಲಿ ಕಾರ್ಮಿಕರಿಗೆ ತಂಗಲು ಸ್ಥಳಾವಕಾಶದ ಸಮಸ್ಯೆಗಳು ಕಡಿಮೆಯಾಗಲಿವೆ.
  • ಈ ಯೋಜನೆಯ ಮೊದಲ ಹಂತವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 19 ಕೋಟಿ ರೂಪಾಯಿ ವೆಚ್ಚದಲ್ಲಿ “ಶ್ರಮಿಕ್ ನಿವಾಸ್- ಬೃಹತ್ ವಸತಿ ಸಮುಚ್ಚಯ’ ಉದ್ಘಾಟನೆಯಾಗಲಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ.

ಕಾರ್ಮಿಕರ ಸಮಸ್ಯೆಗಳು

  • ರಾಜ್ಯದಲ್ಲಿನ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಯಲ್ಲಿ ಶ್ರಮಿಕ ವರ್ಗದ ಪಾತ್ರ ಮಹತ್ವದ್ದಾಗಿದೆ. ಹೀಗೆ ವಿವಿಧೆಡೆ ಕಾರ್ಯ ನಿರ್ವಹಿಸಲು ಆಗಮಿಸುವ ಕಾರ್ಮಿಕ ವರ್ಗ ರಸ್ತೆ ಬದಿ ಮತ್ತು ನೈರ್ಮಲ್ಯಯುತ ಪ್ರದೇಶಗಳಲ್ಲಿ ಗುಡಿಸಲು ಹಾಕಿಕೊಂಡು ಕಾರ್ಯ ನಿರ್ವಹಿಸುವ ಪರಿಸ್ಥಿತಿ ಸರ್ವೇ ಸಾಮಾನ್ಯ. ಇಂತಹ ಸ್ಥಳಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ಬದುಕು ಸಾಗಿಸುವುದರಿಂದ ಅವರಿಗೆ ಮೂಲಭೂತ ಸೌಕರ್ಯದ ಕೊರತೆ ಜೊತೆಗೆ ಅನಾರೋಗ್ಯ ಸಮಸ್ಯೆ ಕೂಡಾ ಕಂಡು ಬರುತ್ತಿದೆ.

ಏನಿದು ಯೋಜನೆ ?

  • ಕೈಗಾರಿಕಾ ಪ್ರದೇಶಗಳು ಸೇರಿದಂತೆ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ಶ್ರಮಿಕ್ ನಿವಾಸ್ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಹಾಗೂ ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದೆ.
  • ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದೆ.
  • ಏಕ ಹಾಸಿಗೆ ವ್ಯವಸ್ಥೆಯಡಿ 96 ಕಾರ್ಮಿಕರು ಮತ್ತು ದ್ವಿ ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರಿಗೆ ವಸತಿ ಅನುಕೂಲ ಲಭಿಸಲಿದೆ.
  • ಇನ್ನು ಕುಟುಂಬದೊಂದಿಗೆ ಉಳಿದುಕೊಳ್ಳ ಬಯಸುವ ಕಾರ್ಮಿಕರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ, ಒಂದು ಕುಟುಂಬದಲ್ಲಿ ನಾಲ್ಕು ಮಂದಿ ಎಂಬಂತೆ 48 ಕಾರ್ಮಿಕ ಕುಟುಂಬಗಳಿಗೆ ಮೊದಲ ಹಂತದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದೆ.
  • ಇದರಲ್ಲಿ ಶಿಶುವಿಹಾರದ ಸೌಲಭ್ಯವೂ ಇರಲಿದೆ. ರಾಜ್ಯದ ಹಲವೆಡೆ ಇರುವ ಕೈಗಾರಿಕಾ ಪ್ರದೇಶಗಳಲ್ಲೂ ಈ ಯೋಜನೆ ವಿಸ್ತರಣೆಯಾಗಲಿದೆ.

ಮೂಲ ಸೌಕರ್ಯಕ್ಕೂ ಆದ್ಯತೆ

  • ಯೋಜನೆಯಡಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗಕ್ಕೆ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೂ ಆದ್ಯತೆ ನೀಡಲಾಗಿದೆ.
  • ಈ ವಸತಿ ಸಮುಚ್ಚಯಗಳನ್ನು ಇಲಾಖೆಯೇ ನಿರ್ವಹಿಸಲಿದ್ದು, ಕಾರ್ಮಿಕ ಮಂಡಳಿ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರಿಗೆ ಈ ವಸತಿ ಸೌಲಭ್ಯ ದೊರೆಯಲಿದೆ.

ಉದ್ದೇಶ

  • ವಲಸೆ ಕಾರ್ಮಿಕರ, ಬಹು ದಿನಗಳ ವಸತಿ ಸಮಸ್ಯೆ ನಿವಾರಣೆ ಆಗಲಿದೆ. ಇದರಿಂದ ಕೈಗಾರಿಕೆಗಳ ಕಾರ್ಮಿಕ ಕೊರತೆ ಸಮಸ್ಯೆಯೂ ನಿವಾರಣೆ ಆಗಲಿದೆ. ಕಾರ್ಮಿಕ ವರ್ಗದ ಅದರಲ್ಲೂ ವಲಸೆ ಕಾರ್ಮಿಕರಿಗೆ ವಸತಿ ಬಹುದೊಡ್ಡ ಸಮಸ್ಯೆಯಾಗಿತ್ತು. ಮಲೀನ ಸ್ಥಳಗಳಲ್ಲಿ ನೆಲೆಯೂರುವ ಅನಿವಾರ್ಯತೆಯಿಂದ ಶ್ರಮಿಕ ವರ್ಗ ಮಾನಸಿಕವಾಗಿ ಹಿಂದುಳಿಯುವಂತೆ ಆಗಿತ್ತು.