Published on: February 20, 2023

ಸರ್ವಜ್ಞ ಜಯಂತಿ

ಸರ್ವಜ್ಞ ಜಯಂತಿ


ಸುದ್ದಿಯಲ್ಲಿ ಏಕಿದೆ? ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಫೆಬ್ರವರಿ 20 ರಂದು ತ್ರಿಪದಿ ಕವಿ ಸರ್ವಜ್ಞ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದೆ.


ಮುಖ್ಯಾಂಶಗಳು

  • 6ನೇ ಶತಮಾನದಲ್ಲಿ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ವಚನಕಾರ, ದಾರ್ಶನಿಕ ಕವಿ ಸರ್ವಜ್ಞನ ಜಯಂತಿ ಆಚರಣೆ ಮಾಡಲಾಗುತ್ತಿದೆ.
  • ಇದು 503 ನೇ ಜಯಂತಿಯಾಗಿದೆ.

ಸರ್ವಜ್ಞ (ಸಂಸ್ಕೃತದಲ್ಲಿ “ಎಲ್ಲವನ್ನೂ ತಿಳಿದವ” ಎಂದರ್ಥ)

  • ಈತ ಕನ್ನಡದ ತ್ರಿಪದಿ ಸಾಹಿತ್ಯದ ಪ್ರಮುಖ ಕವಿ. ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲದ ಕುರಿತು ಹೆಚ್ಚು ತಿಳಿದಿಲ್ಲ. ಇತರ ಲೇಖಕರು ಅವನ ಬಗ್ಗೆ ಮಾಡಿರುವ ಪ್ರಸ್ತಾಪಗಳಿಂದ ಮತ್ತು ಸರ್ವಜ್ಞನ ಭಾಷಾ ಪ್ರಯೋಗದ ಲಕ್ಷಣಗಳ ಅಧ್ಯಯನದಿಂದ ಈತನು ಜೀವಿಸಿದ್ದ ಕಾಲ ಸುಮಾರಾಗಿ 16ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ.
  • ಪ್ರಾಯಶಃ ಪುಷ್ಪದತ್ತಈತನ ನಿಜನಾಮವಾಗಿದ್ದು, ಸರ್ವಜ್ಞ ಎಂಬುದು ಈತನ ಕಾವ್ಯನಾಮ.
  • ಜನನ : ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲ್ಲೂಕು ಅಂಬಲೂರ ಮಾಸೂರು. ಇದು ಈಗ ಸರ್ವಜ್ಞನ ಮಾಸೂರು ಎಂದೇ ಪ್ರಸಿದ್ಧಿ ಪಡೆದಿದೆ.
  • ಅವನ ಹೆತ್ತಮ್ಮ ಕುಂಬಾರ ಮಾಳೆ, ಸಾಕು ತಾಯಿ ಮಲ್ಲಕ್ಕ. ತಂದೆ ಬಸವರಸ. 

ತ್ರಿಪದಿಗಳು

  • ಒಟ್ಟು ಸುಮಾರು 1,000 ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ. ಚರಿತ್ರಜ್ಞರ ಪ್ರಕಾರ ಇವುಗಳಲ್ಲಿ ಕೆಲವು ತ್ರಿಪದಿಗಳು ನಂತರದ ಕಾಲದಲ್ಲಿ ಬೇರೆ ಬೇರೆ ಲೇಖಕರಿಂದ ಬರೆಯಲ್ಪಟ್ಟಿರಬಹುದು.
  • ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ. ಈ ತ್ರಿಪದಿಗಳು ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳನ್ನು ಕುರಿತವು. ಹಲವು ಒಗಟುಗಳು ಸಹ ಸರ್ವಜ್ಞನ ತ್ರಿಪದಿಗಳಲ್ಲಿ ಸೇರಿವೆ.
  • ಜನರ ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ಚಿಕಿತ್ಸಕ ನೋಟದೊಂದಿಗೆ ತಿದ್ದಿದ ಸಮಾಜ ಸುಧಾರಕ.
  • ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದೆ. ತ್ರಿಪದಿಗಳು ಸಾರುವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ. ಇವುಗಳು ಹಲವು ಭಾಷೆಗಳಿಗೆ ಭಾಷಾಂತರಗೊಂಡಿದ್ದು, ಭಾಷೆ ಮತ್ತು ಗಡಿಗಳ ಎಲ್ಲೆ ಮೀರಿ ಕರ್ನಾಟಕದ ಕೀರ್ತಿಯನ್ನು ಬೆಳಗಿಸಿವೆ.